WELCOME

ಈ ಬ್ಲಾಗಿನಲ್ಲಿ ಪತ್ರಿಕೆಗಳಲ್ಲಿ ಪ್ರಕಟವಾದ ನನ್ನ ಬರೆಹಗಳ ಜೆಪಿಜಿ ಪ್ರತಿಗಳನ್ನು ಹಂಚಿಕೊಳ್ಳತ್ತೇನೆ.














ಹುಡುಕಿ

Friday, January 25, 2013

ಕಟ್ಟುವೆವು ನಾವು - ಗೋಪಾಲಕೃಷ್ಣ ಅಡಿಗ

ಕಟ್ಟುವೆವು ನಾವು ಹೊಸ ನಾಡೊಂದನು, -ರಸದ
ಬೀಡೊಂದನು

ಹೊಸನೆತ್ತರುಕ್ಕುಕ್ಕಿ ಆರಿಹೋಗುವ ಮುನ್ನ,
ಹರೆಯದೀ ಮಾತ್ರಿಕನ ಮಾಟ ಮಸುಳುವ ಮುನ್ನ,
ಉತ್ಸಾಹ ಸಾಹಸದ ಉತ್ತುಂಗ ವೀಚಿಗಳ
ಈ ಕ್ಷುಬ್ದಸಾಗರವು ಬತ್ತಿ ಹೋಗುವ ಮುನ್ನ
ಕಟ್ಟುವೆವು ನಾವು ಹೊಸ ನಾಡೊಂದನು!

ನಮ್ಮೆದೆಯ ಕನಸುಗಳೆ ಕಾಮಧೇನು
ಆದಾವು, ಕರೆದಾವು ವಾಂಛಿತವನು;
ಕರೆವ ಕೈಗಿಹುದಿದೋ ಕನಸುಗಳ ಹರಕೆ;
ಗುರಿ ತಪ್ಪದೊಮ್ಮುಖದ ಬಯಕೆ ಬೆಂಬಲಕೆ!

ಜಾತಿಮತಭೇದಗಳ ಕಂದಕವು ಸುತ್ತಲೂ,
ದುರ್ಭೆದ್ಯವೆನೆ ಕೋಟೆಕೊತ್ತಲಗಳು;
ರೂಢಿರಾಕ್ಷಸನರಸುಗೈಯುವನು, ತೋಳ್ತಟ್ಟಿ
ತೊಡೆತಟ್ಟಿ ಕರೆಯುವನು ಸಂಗ್ರಾಮಕೆ!

ನಾವು ಹಿಂದೆಗೆವೆವೇ? ವೀರ ತರುಣರು ನಾವು!
ಒಂದೆ ನೆಗೆತಕೆ ನೆಗೆವೆವೋ ಕಂದಕವನು,
ಕುಟ್ಟಿ ಪುಡಿಮಾಡುವೆವು ಕೋಟೆಗಳನು,
ಎದೆಯ ಮೆಟ್ಟಿ ಮುರಿಯುವೆವಸುರ ರಟ್ಟೆಗಳನು!

ಕೋಟೆಗೋಡೆಗೆ ನಮ್ಮ ಹೆಣಗಳೇ ಮೆಟ್ಟಿಲು,
ನಮ್ಮ ಸಾವೇ ನೋವೆ ಹೊಸ ನಾಡ ತೊಟ್ಟಿಲು
ಆದಾವು; ಅಂಜುವೆದೆ ನಮ್ಮದಲ್ಲ;
ಸೋಲುಬಗೆ ವೀರನಿಗೆ ಸಲ್ಲ, ಹೊಲ್ಲ!


ಎಡರುಗಳ ಕಡಲುಗಳನೀಸಿ ಬರುವೆವು, ಘೋರ
ನೈರಾಶದಗ್ನಿಮುಖದಲ್ಲು ಕೂಡ
ಹೊಕ್ಕು ಹೊರಡುವೆವೆಲ್ಲ ತೊಡಕುಗಳ ಒಡಕುಗಳ
ಬಿಡಿಸಿ, ಇಡಿಗೊಳಿಸಿ ಕಟ್ಟುವೆವು ನಾಡ!

ಇಂದು ಬಾಳಿದು ಕೂಳ ಕಾಳಗವು; ಹೊಟ್ಟೆಯೋ
ಕೇಂದ್ರವಾಗಿದೆ ನರನ ಜೀವಿತಕ್ಕೆ;
ಅನ್ನದನ್ಯಾಯ ದಾವಾಗ್ನಿಯಲ್ಲಿ ಕರಗುತಿದೆ
ನರತೆ, ಸಂಸ್ಕೃತಿ, ಪ್ರೀತಿ, ದಿವದ ಬಯಕೆ!

ಇರುವೆಲ್ಲವನು ಎಲ್ಲ ಜನಕೆ ತೆರವಾಗಿಸುವ
ಸಮಬಗೆಯ ಸಮಸುಖದ ಸಮದುಃಖದ
ಸಾಮರಸ್ಯದ ಸಾಮಗಾನಲಹರಿಯ ಮೇಲೆ
ತೇಲಿ ಬರಲಿದೆ ನೋಡು, ನಮ್ಮ ನಾಡು!


ಇಲ್ಲೆ ಈ ಎಡೆಯಲ್ಲಿ ನಮ್ಮ ಮುಂಗಡೆಯಲ್ಲೆ,
ಅಳಲುಗಳ ಹೆಡೆಯಲ್ಲೆ,
ಸೋಲುಗಳ ತೊಡೆಯಲ್ಲೆ
ಅರಳೀತು ನಮ್ಮ ನಾಡು;
ನಮ್ಮೆದೆಯ ತುಂಬಿರುವ ಅದರ ನರುಗಂಪು ಹೊರ
ಹೊಮ್ಮುವುದು ಕಾದು ನೋಡು!


ಉತ್ಸಾಹ ಉದ್ವೇಗ ಉದ್ರೇಕಗಳ ವೀರ
ಯುವಜನದ ನಾಡ ಗುಡಿಯು;
ಅದರ ಹಾರಾಟಕ್ಕೆ ಬಾನೆ ಗಡಿಯು,
ಬರಲು ಬಿಡೆವೆಂದಿಗೂ ಅದಕೆ ತಡೆಯು!
ತಡೆವವರು ಬನ್ನಿರೋ, ಹೊಡೆವವರು ಬನ್ನಿರೋ,
ಕೆಡೆನುಡಿವ ಕೆಡೆಬಗೆವ ಕೆಡುಕು ಜನರೇ ಬನ್ನಿ!
ಕೊಟ್ಟೆವಿದೊ ವೀಳೆಯವನು;
ನಿಮ್ಮೆಲರನು ತೊಡೆದು ನಿಮ್ಮ ಮಸಣದ ಮೇಲೆ
ಕಟ್ಟುವೆವು ನಾವು ಹೊಸ ನಾಡೊಂದನು, - ಸುಖದ
ಬೀಡೊಂದನು!

No comments:

Post a Comment